ಕಯ್ಯಾರ ಕಿಞ್ಞಣ್ಣ ರೈ ೨೦೧೦ರಲ್ಲಿ ಸಂಪದ ನಡೆಸಿದ ಸಂದರ್ಶನದ ಸಮಯ- ಕಯ್ಯಾರ ಕಿಞ್ಞಣ್ಣ ರೈ

ಕಯ್ಯಾರ ಕಿಞ್ಞಣ್ಣ ರೈ ಅಖಿಲ ಕರ್ನಾಟಕದ ಮಹಾಕವಿಯಾಗಿ, ಹಿರಿಯ ಸಾಹಿತಿಯಾಗಿ, ಬಹುಭಾಷಾ ವಿದ್ವಾಂಸರಾಗಿ, ಸ್ವಾತಂತ್ರ್ಯ ಹೋರಾಟಗಾರರಾಗಿ, ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಮಂಚೂಣಿಯ ನಾಯಕರಾಗಿ, ಕಾಸರಗೋಡು ವಿಲೀನೀಕರಣ ಕ್ರಿಯಾಸಮಿತಿಯ ಪ್ರಧಾನ ಸಂಚಾಕರಾಗಿ, ನಿರಂತರವಾಗಿ ದುಡಿದವರು. ನಾಡೋಜ ಡಾ.ಕಯ್ಯಾರ ಕಿಞ್ಞಣ್ಣ ರೈರವರು, ಅಖಿಲಭಾರತ ಮಟ್ಟದಲ್ಲಿ ಜರುಗಿದ ೬೬ ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.

ಆರಂಭಿಕ ಜೀವನ

ಕಯ್ಯಾರ ಕಿಞ್ಞಣ್ಣ ರೈ ಕೇರಳ ರಾಜ್ಯದಲ್ಲಿರುವ ಕಾಸರಗೋಡು ತಾಲೂಕಿನ ಪೆರಡಾಲ ಗ್ರಾಮದಲ್ಲಿ ೧೯೧೫ ಜೂನ ೮ ರಂದು ಜನಿಸಿದರು. ತಂದೆ ದುಗ್ಗಪ್ಪ ರೈ, ತಾಯಿ ದೈಯಕ್ಕೆ. ಕಯ್ನಾರರು ಉಞ್ಞಕ್ಕ ಅವರನ್ನು ಬಾಳ ಸಂಗಾತಿಯಾಗಿ ಸ್ವೀಕರಿಸಿ ಆರು ಮಂದಿ ಗಂಡು ಮಕ್ಕಳು ಹಾಗೂ ಇಬ್ಬರು ಹೆಣ್ಣು ಮಕ್ಕಳ ತುಂಬು ಸಂಸಾರದೊಂದಿಗೆ ಬದಿಯಡ್ಕ ಪೆರಡಾಲ "ಕವಿತಾ ಕುಟೀರ"ದಲ್ಲಿ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ರೈಗಳ ಮನೆಮಾತು ತುಳು. ರೈಗಳು ಹಲವು ತುಳು ಕವನಗಳನ್ನು, ಲೇಖನಗಳನ್ನು ಬರೆದಿದ್ದಾರೆ. 'ಪರಿವು ಕಟ್ಟುಜಿ, ರಡ್ಡ್ ಕಣ್ಣ್‌ಡ್' 'ಸಾರೊ ಎಸಳ್ದ ತಾಮರೆ' 'ಲೆಪ್ಪುನ್ಯೇರ್?' 'ಬತ್ತನೊ ಈ ಬರ್ಪನೊ' - ರೈಗಳ ಕೆಲವು ತುಳು ಕವನಗಳು. ರೈಗಳ ಕನ್ನಡ ಕವಿತೆಗಳಲ್ಲಿ ಹೆಚ್ಚಾಗಿ ಕಾಣಸಿಗದ ಪ್ರಾದೇಶಿಕ ರಂಗು, ಜಾನಪದ ಲೋಕ ಅವರ ತುಳು ಕವಿತೆಗಳಲ್ಲಿ ಅರಳಿಕೊಳ್ಳುತ್ತದೆ. 'ಕನ್ನಡಾಂತರ್ಗತವಾದ ತುಳು ಬದುಕ'ನ್ನು ಒಪ್ಪಿದ ಕವಿ ತುಳು ಭಾಷೆಯ ಸ್ಥಿತಿಗತಿಯ ಬಗ್ಗೆ ವ್ಯಥೆಪಡುತ್ತಾರೆ. ಶಿಕ್ಷಣ/ವೃತ್ತಿ

ರೈಯವರು ಸಂಸ್ಕೃತ ಮತ್ತು ಕನ್ನಡ ಭಾಷೆಗಳಲ್ಲಿ ವಿದ್ವಾನ್ ಪದವಿ ಪಡೆದ ಬಳಿಕ ಬಿ.ಎ.ಪದವಿಯನ್ನು ಪಡೆದು ಅಧ್ಯಾಪಕ ತರಭೇತಿಯನ್ನು ಪೂರೈಸಿದರು. ಆನಂತರ ಎಂ.ಎ. ಸ್ನಾತಕೋತ್ತರ ಪದವೀಧರರೂ ಆದರು. ಕಾಸರಗೋಡಿನ ಬಳಿಯ ಪೆರಡಾಲ ಗ್ರಾಮದ ನವಜೀವನ ಪ್ರೌಢಶಾಲೆಯಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಸಾಮಾಜಿಕ ಬದುಕು

ಕಯ್ಯಾರ ಕಿಞ್ಞಣ್ಣ ರೈಯವರು ಸ್ವಾತಂತ್ರ್ಯಸಂಗ್ರಾಮದಲ್ಲಿ ಹೋರಾಡಿದ್ದಾರೆ. ಹರಿಜನ ಸೇವಕ ಸಂಘಟನೆಯಲ್ಲಿ ದುಡಿದಿದ್ದಾರೆ. ಸ್ಥಳೀಯ ಪಂಚಾಯತಿಯ ಅಧ್ಯಕ್ಷ ಪದವಿಯನ್ನೂ ಅಲಂಕರಿಸಿದ್ದರು. ಕೇರಳ ಸಂಗೀತ ನಾಟಕ ಆಕಾಡೆಮಿಯ ಸದಸ್ಯರೂ ಆಗಿದ್ದರು. ಅಲ್ಲದೆ ಕಾಸರಗೋಡು ತಾಲೂಕನ್ನು ಕರ್ನಾಟಕ ರಾಜ್ಯಕ್ಕೆ ಸೇರಿಸಲು ಅವರು ಹೋರಾಟ ಮಾಡಿದವರು.