ಗಾಂಧೀ ದೃಷ್ಟಿಯಲ್ಲಿ ಸ್ವರಾಜ್ಯ

ಗಾಂಧೀ ದೃಷ್ಟಿಯಲ್ಲಿ ಸ್ವರಾಜ್ಯ ಬದಲಾಯಿಸಿ

ಭಾರತದ ಸ್ವಾತಂತ್ರ್ಯಕ್ಕಾಗಿ ಅಪ್ರತಿಮವಾಗಿ ಹೋರಾಟ ನಡೆಸಿದ ಗಾಂಧೀಜಿಯವರು ಕೇವಲ ರಾಜಕೀಯ ಸ್ವಾತಂತ್ರ್ಯದ ಗುರಿ ಇಟ್ಟುಕೊಂಡಿರಲಿಲ್ಲ. ಪುರ್ಣ ಸ್ವರಾಜ್ಯದ ಸ್ಥಾಪನೆಗೆ ರಾಜಕೀಯ ಸ್ವಾತಂತ್ರ್ಯ ಮೊದಲ ಮೆಟ್ಟಲೆಂದು ಮಾತ್ರ ಭಾವಿಸಿದ್ದರು. ಅವರ ದೃಷ್ಟಿಯಲ್ಲಿ ಸ್ವರಾಜ್ಯವೆಂದರೆ ಪರಿಪುರ್ಣವಾದ ಪ್ರಜಾರಾಜ್ಯ. ಈ ವ್ಯವಸ್ಥೆಯಲ್ಲಿ ಸಾರ್ವಭೌಮಾಧಿಕಾರವಿರುವುದು ಪ್ರಜೆಗಳಲ್ಲೇ ಹೊರತು ಪ್ರಭುತ್ವದಲ್ಲಿ ಅಲ್ಲ. ಪ್ರಜೆಗಳ ಸಾರ್ವಭೌಮತ್ವಕ್ಕೆ ಬುನಾದಿ ನೈತಿಕ ಅಧಿಕಾರ, ದಂಡಿನ ಬಲವಲ್ಲ. ಸತ್ಯ, ಅಹಿಂಸೆ, ಸ್ವಾತಂತ್ರ್ಯ, ಸಮಾನತೆ - ಈ ಮೌಲ್ಯಗಳ ಸಾಕ್ಷತ್ಕಾರವೇ ಪ್ರಜೆಗಳ ಗುರಿ. ಈ ಮೌಲ್ಯಗಳು ಹೆಚ್ಚುಹೆಚ್ಚಾಗಿ ಅನುಷ್ಠಾನಕ್ಕೆ ಬಂದಂತೆ ವ್ಯಕ್ತಿಗಳ ವಿಕಾಸದ ಹಾಗೂ ಸಮಾಜದ ಮೇಲ್ಮೆಯ ಸಾಧನೆಯಾಗುತ್ತ ಹೋಗುತ್ತದೆ. ಅಂಥ ಪ್ರಜಾರಾಜ್ಯ ಶೋಷಣರಹಿತ ವರ್ಗರಹಿತ ರಾಜ್ಯವಾಗಿರುತ್ತದೆ. ಪುರ್ಣ ಸ್ವರಾಜ್ಯ ಏರ್ಪಟ್ಟಾಗ ಯಾವುದೇ ರೀತಿಯ ಸರ್ಕಾರಿ ಅಂಕುಶವಿರುವುದಿಲ್ಲ. ಈ ವ್ಯವಸ್ಥೆಯಲ್ಲಿ ಜನೆತೆಗೆ ಪುರ್ಣವಾಗಿ ಸಾಮಾಜಿಕ ನ್ಯಾಯ, ಆರ್ಥಿಕ ನೆಮ್ಮದಿ ಹಾಗೂ ವ್ಯಕ್ತಿಸ್ವಾತಂತ್ರ್ಯ ಇರುತ್ತವೆ. ಇಂಥ ಪ್ರಜಾರಾಜ್ಯವನ್ನು ಗಾಂಧಿಯವರು ರಾಮರಾಜ್ಯವೆಂದು ಕರೆದರು; ಪ್ರಬುದ್ಧ ಅರಾಜಕತೆ (ಎನ್ಲೈಟನ್ಡ್ ಆನಾರ್ಕಿ) ಎಂದರು.

ಸರ್ಕಾರವೇ ಇಲ್ಲದ ರಾಜ್ಯ ಆದರ್ಶವಾದರೂ ಸದ್ಯಕ್ಕೆ ಅದು ಎಟುಕದ ಆದರ್ಶ. ಆದ್ದರಿಂದ ಯಾವುದು ಅತ್ಯಂತ ಮಿತವಾದ ಪ್ರಭುತ್ವವೋ ಅದೇ ಉತ್ಕೃಷ್ಟ ಪ್ರಭುತ್ವ ಎಂಬ ಥಾರೋವಿನ ವಿಚಾರವನ್ನು ಗಾಂಧಿಯವರು ಒಪ್ಪಿಕೊಂಡರು.

ಸ್ವತಂತ್ರ್ಯ ಭಾರತ ಬ್ರಿಟನಿನ ಸಂಸದೀಯಪ್ರಭುತ್ವ ಪದ್ಧತಿಯನ್ನಾಗಲಿ ಸೋವಿಯೆತ್ ಪದ್ಧತಿಯನ್ನಾಗಲಿ ಫ್ಯಾಸಿಸ್ಟ್ ಪದ್ಧತಿಯನ್ನಾಗಲಿ ಅನುಕರಿಸಬಾರದು. ಅವುಗಳಲ್ಲಿ ಯಾವುದೂ ಭಾರತೀಯ ಜನಜೀವನ ಅಥವಾ ಸಂಸ್ಕೃತಿಗೆ ಹೊಂದಿಕೊಳ್ಳುವಂಥದಲ್ಲ. ಪಾಶ್ಚಾತ್ಯ ರಾಷ್ಟ್ರಗಳಲ್ಲಿ ರೂಢವಾಗಿರುವ ಪ್ರಭುತ್ವಗಳೆಲ್ಲವೂ ಸಾಮ್ರಾಜ್ಯವಾದ, ಹಿಂಸೆ, ಶೋಷಣೆ ಇವುಗಳ ಮೇಲೆ ನಿಂತಿರುವಂಥವು. ಆದ್ದರಿಂದ ಅವು ಭಾರತಕ್ಕೆ ವಜ್ಯವೆಂಬುದು ಗಾಂಧಿಯವರ ಮತ.

ಭಾರತದಲ್ಲಿ ಕೇವಲ ಕೆಲವು ಜನತಾಪ್ರತಿನಿಧಿಗಳು ಅಧಿಕಾರಸೂತ್ರ ವಹಿಸಿಕೊಂಡರೆ ನಿಜವಾದ ಸ್ವರಾಜ್ಯವಾಗಲಾರದು. ಸರ್ಕಾರ ತಪ್ಪು ಮಾಡಿದಾಗ ಅದನ್ನು ತಡೆಗಟ್ಟುವ ಸಾಮರ್ಥ್ಯ ಪ್ರತಿಯೊಬ್ಬ ಪ್ರಜೆಗೂ ಬಂದಾಗಲೇ ನಿಜವಾದ ಸ್ವರಾಜ್ಯಪ್ರಾಪ್ತಿ ಎಂಬುದು ಗಾಂಧಿಯವರ ಅಭಿಪ್ರಾಯವಾಗಿತ್ತು. ರಾಜಕೀಯ ಅಧಿಕಾರದ ಕೇಂದ್ರೀಕರಣವಾದಷ್ಟೂ ಪ್ರಭುತ್ವ ಜನಸಾಮಾನ್ಯರ ಹಿಡಿತದಿಂದ ದೂರ ಸರಿಯುತ್ತದೆ. ಹಿಂಸೆಯನ್ನು ಆಧರಿಸಿದ ಸರ್ಕಾರ ದೊಡ್ಡ ಶೋಷಕಶಕ್ತಿಯಾಗುವುದಲ್ಲದೆ ವ್ಯಕ್ತಿಸ್ವಾತಂತ್ರ್ಯಕ್ಕೆ ಕಂಟಕವಾಗುತ್ತದೆ. ಅಂಥ ಕೇಂದ್ರೀಕೃತ ರಾಜಕೀಯ ವ್ಯವಸ್ಥೆ ಜನರ ಹೆಸರಿನಲ್ಲಿ ನಡೆದರೂ ಅದು ಹೆಸರಿಗೆ ಮಾತ್ರ ಪ್ರಜಾಪ್ರಭುತ್ವವಾಗಿರುತ್ತದೆ. ಪ್ರಜೆಗಳು ತಮ್ಮ ಆಗುಹೋಗುಗಳನ್ನು ನಿರ್ಧರಿಸುವುದರಲ್ಲಿ ಸಕ್ರಿಯಾಪಾತ್ರವಹಿಸಲಾಗುವುದಿಲ್ಲ. ಬದಲಾಗಿ ಪ್ರತಿಯೊಂದು ಕೆಲಸಕ್ಕೂ ಸರ್ಕಾರವನ್ನೇ ಎದುರು ನೋಡುವ ಅಸಹಾಯಕ ಪರಿಸ್ಥಿತಿಯಲ್ಲಿರುತ್ತಾರೆ. ಇದು ತಪ್ಪಬೇಕಾದರೆ ರಾಜಕೀಯ ಅಧಿಕಾರದ ವಿಕೇಂದ್ರೀಕರಣವಾಗಬೇಕು. ಭಾರತದಲ್ಲಿ ರಾಜ್ಯಶಕ್ತಿಯ ವಿಕೇಂದ್ರೀಕರಣಕ್ಕೆ ಸಹಾಯಕವಾಗುವ ಗ್ರಾಮ ಘಟಕಗಳಿವೆ. ಗಾಂಧಿಯವರ ದೃಷ್ಟಿಯಲ್ಲಿ ಪ್ರತಿ ಗ್ರಾಮವೂ ಸ್ವಾಯತ್ತತೆಯ ಘಟಕವಾಗಬೇಕು. ಅವರು ದೇಶದ ಮುಂದಿಟ್ಟ ಗ್ರಾಮಸ್ವರಾಜ್ಯದ ಚಿತ್ರವಿದು.

ನನ್ನ ಕಲ್ಪನೆಯ ಗ್ರಾಮಸ್ವರಾಜ್ಯವೆಂದರೆ ಅದೊಂದು ಪರಿಪುರ್ಣಗಣರಾಜ್ಯ. ತನ್ನ ಪ್ರಧಾನ ಅಗತ್ಯಗಳಲ್ಲಿ ಅದು ನೆರೆಹೊರೆಯವರಿಂದ ಸ್ವತಂತ್ರ್ಯ. ಆದರೂ ಅಗತ್ಯವಾದಲ್ಲಿ, ಎಷ್ಟೋ ವಿಷಯಗಳಲ್ಲಿ ಗ್ರಾಮಗಳು ಪರಸ್ಪರಾವಲಂಬಿಯಾಗಿರುತ್ತವೆ. ಹೀಗೆ ತನ್ನ ಆಹಾರ ಬೆಳೆಯುವುದು, ಬಟ್ಟೆಗಾಗಿ ಹತ್ತಿ ಬೆಳೆಯುವುದು, ಪ್ರತಿ ಹಳ್ಳಿಯ ಮೊದಲ ಗಮನ. ದನಕರುಗಳಿಗಾಗಿ ಕಾವಲು, ಮಕ್ಕಳಿಗಾಗಿಯೂ ಪ್ರೌಢರಿಗಾಗಿಯೂ ಆಟಕ್ಕೂ ಮನೋರಂಜನೆಗೂ ಸ್ಥಳ ಇರಬೇಕು. ಇದಕ್ಕೆಲ್ಲ ಆಗಿ ಭೂಮಿ ಮಿಕ್ಕರೆ ಅದರಲ್ಲಿ ಗಾಂಜಾ, ತಂಬಾಕು, ಅಫೀಮುಗಳ ಹೊರತಾಗಿ ಉಪಯೋಗಕರ ಹಣದ ಬೆಳೆಗಳನ್ನು ಬೆಳೆಯಬಹುದು. ಹಳ್ಳಿಹಳ್ಳಿಯಲ್ಲೂ ನಾಟಕಮಂದಿರ, ಶಾಲೆ, ಸಭಾಭವನ ಇದ್ದಾವು; ಶುದ್ಧವಾದ ನೀರಿನ ಪುರೈಕೆಯ ಕೇಂದ್ರ ಇದ್ದೀತು. ಮೂಲಶಿಕ್ಷಣದ ಅವಧಿಯ ಪುರ್ಣ ಶಿಕ್ಷಣ ಕಡ್ಡಾಯವಿದ್ದೀತು. ಸಾಧ್ಯವಿದ್ದಷ್ಟು ಮಟ್ಟಿಗೂ ಪ್ರತಿಯೊಂದು ಕೆಲಸವನ್ನು ಸಹಕಾರತತ್ತ್ವದ ಆಧಾರದ ಮೇಲೆ ಕೈಗೊಳ್ಳಲಾದೀತು. ಘಟ್ಟಘಟ್ಟಗಳ ಅಸ್ಪೃಶ್ಯತೆಯುಳ್ಳ ಇಂದಿನಂಥ ಜಾತಿಗಳಿರುವುದಿಲ್ಲ. ಸತ್ಯಾಗ್ರಹ ಹಾಗೂ ಅಸಹಕಾರ ತಂತ್ರವುಳ್ಳ ಅಹಿಂಸೆಯೇ ಗ್ರಾಮಸಮಾಜದ ಆಧಾರಶಕ್ತಿ. ಹಳ್ಳಿಯಲ್ಲಿ ಇಡಲಾದ ಒಂದು ಖಾತೆಯಿಂದ ಸರದಿ ಪ್ರಕಾರ ಆರಿಸಲಾಗುವ, ಎಲ್ಲರಿಗೂ ಅನಿವಾರ್ಯವಾದ, ಗ್ರಾಮರಕ್ಷಕ ಪಡೆ ಇದ್ದೀತು. ಹಳ್ಳಿಯಲ್ಲಿ ಯೋಗ್ಯಕನಿಷ್ಠ ಅರ್ಹತೆಗಳುಳ್ಳ ಎಲ್ಲ ಪ್ರೌಢ ಸ್ತ್ರೀಪುರುಷರೂ ವರ್ಷಕ್ಕೊಮ್ಮೆ ಚುನಾಯಿಸುವ ಐವರ ಪಂಚಾಯಿತಿ ಹಳ್ಳಿಯ ಆಡಳಿತವನ್ನು ನಡೆಸಿಕೊಂಡು ಹೋಗುವುದು. ಆಡಳಿತಕ್ಕೆ ಬೇಕಾದ ಅಧಿಕಾರ, ವ್ಯಾಪ್ತಿ ಎರಡೂ ಈ ಮಂಡಳಿಗೆ ಇರುವುವು. ಪ್ರಚಲಿತ ಅರ್ಥದ ಶಿಕ್ಷೆಯ ಪದ್ಧತಿ ಇರುವುದಿಲ್ಲವಾದ್ದರಿಂದ ಪಂಚಾಯಿತಿಯೇ ಶಾಸಕಾಂಗ ನ್ಯಾಯಾಂಗ ಕಾರ್ಯಾಂಗಗಳಾಗಿ ತನ್ನ ಒಂದು ವರ್ಷದ ಅಧಿಕಾರಾವಧಿಯಲ್ಲಿ ಕೆಲಸ ಮಾಡೀತು. ಇಲ್ಲಿ ವ್ಯಕ್ತಿಸ್ವಾತಂತ್ರ್ಯದ ಆಧಾರದ ಮೇಲೆ ಪರಿಪುರ್ಣ ಜನತಂತ್ರವಿದೆ. (ಆಧಾರ : ಹರಿಜನ, ಜುಲೈ 26, 1942)

ಗ್ರಾಮ ಗಣರಾಜ್ಯಗಳ ಮಹಾ ಒಕ್ಕೂಟವೇ ಭಾರತರಾಷ್ಟ್ರ. ಅಸಂಖ್ಯ ಹಳ್ಳಿಗಳುಳ್ಳ ಈ ರಚನೆಯಲ್ಲಿ ಸದಾ ವ್ಯಾಪಕವೃತ್ತಗಳಿರುತ್ತವೆ; ಆರೋಹಣ ವೃತ್ತಗಳಿರುವುದಿಲ್ಲ. ಬದುಕು ಪಿರಮಿಡಿನಂತಿರುವುದಿಲ್ಲ. ಅದು ಸಾಗರ ಸಮವೃತ್ತದಂತೆ. ಅದರ ಕೇಂದ್ರಬಿಂದು ವ್ಯಕ್ತಿ. ಆತ ತನ್ನ ಹಳ್ಳಿಗಾಗಿ ಅಳಿಯಲೂ ಸಿದ್ಧ. ಗ್ರಾಮಗಳ ಸಮೂಹಕ್ಕಾಗಿ ನಾಶವಾಗಲು ಹಳ್ಳಿ ಸಿದ್ಧ. ಕೊನೆಗೆ ಇಡೀ ಜೀವನ ಒಂದು ಪುರ್ಣತೆಯಾಗುತ್ತದೆ. ಅದರಲ್ಲಿರುವ ವ್ಯಕ್ತಿಗಳು ಎಂದೂ ಅಹಂಕಾರದಿಂದ ಆಕ್ರಮಣಕಾರಿಗಳಾಗುವುದಿಲ್ಲ. ಅವರು ಸದಾ ವಿನಿಮ್ರರು. ಸಾಗರ ಸಮವೃತ್ತದ ಗಾಂಭೀರ್ಯದಲ್ಲಿ ಪಾಲುಗೊಂಡವರು.

ಆದ್ದರಿಂದ ಹೊರಗಿನ ವೃತ್ತ ಒಳಗಿನ ವೃತ್ತವನ್ನು ತುಳಿಯಲು ತನ್ನ ಅಧಿಕಾರವನ್ನು ಉಪಯೋಗಿಸುವುದಿಲ್ಲ. ಅದರ ಬದಲಾಗಿ ತಾನೂ ಅದಕ್ಕೆ ಶಕ್ತಿ ನೀಡುತ್ತದೆ. ಅದರಿಂದ ತಾನೂ ಶಕ್ತಿ ಪಡೆಯುತ್ತದೆ. ಇದೆಲ್ಲ ಅಸಾಧ್ಯವಾದ ಆದರ್ಶ ಎಂದು ನೀವು ನನ್ನನ್ನು ಮೂದಲಿಸಬಹುದು. ಮನುಷ್ಯಮಾತ್ರರು ಗುರುತಿಸಲಾದ ಯೂಕ್ಲಿಡನ ಬಿಂದುವಿಗೇ ಅಳಿಯದ ಬೆಲೆ ಇರುವುದಾದರೆ ಮಾನವಕುಲ ಉಳಿಯುವಂಥ ನನ್ನ ಚಿತ್ರಕ್ಕೂ ತನ್ನದೇ ಆದÀ ಮೌಲ್ಯವುಂಟು. ಚಿತ್ರವನ್ನು ಪರಿಪುರ್ಣವಾಗಿ ಎಂದೂ ಸಾಧಿಸಲಾಗ ದಿದ್ದರೂ ಭಾರತ ಈ ನೈಜ ಚಿತ್ರಕ್ಕಾಗಿ ಬದುಕಲಿ, ನಮಗೆ ಬೇಕಾದುದರ ಯೋಗ್ಯ ಚಿತ್ರವಿಲ್ಲದೆ ನಾವು ಅದರತ್ತ ಧಾವಿಸುವುದು ಸಾಧ್ಯವಿಲ್ಲ. ಭಾರತದ ಪ್ರತಿಯೊಂದು ಹಳ್ಳಿಯಲ್ಲೂ ಎಂದಾದರೊಂದು ದಿನ ಪ್ರಜಾರಾಜ್ಯವಾಗಬೇಕಾಗಿದ್ದರೆ ನನ್ನ ಈ ಚಿತ್ರವೇ ಸರಿ ಎನ್ನುತ್ತೇನೆ. ಇದರಲ್ಲಿ ಕೊನೆಯದೂ ಮೊದಲಿನದೂ ಪರಸ್ಪರ ಸಮಾನ; ಅರ್ಥಾತ್ ಪ್ರಥಮ ಅಂತಿಮ ಯಾವುದೂ ಇದರಲ್ಲಿಲ್ಲ. (ಆಧಾರ: ಹರಿಜನ ಜುಲೈ 22,1946). ಪ್ರಜಾಪ್ರಭುತ್ವದ ಯಶಸ್ಸು ವಿಕೇಂದ್ರೀಕರಣವನ್ನು ಅವಲಂಬಿಸಿದೆ ಎಂಬುದು ಗಾಂಧಿಯವರ ಸ್ಪಷ್ಟ ಅಭಿಮತ, ವಿಕೇಂದ್ರೀಕೃತ ವ್ಯವಸ್ಥೆಯಲ್ಲಿ ಮಾತ್ರ ಅಹಿಂಸೆಯ ಆಚರಣೆ ಸಾಧ್ಯ. ಅಹಿಂಸೆ ಆಧಾರವಾಗಿರದ ಪ್ರಜಾತಂತ್ರ ನಿಜವಾದ ಪ್ರಜಾಪ್ರಭುತ್ವ ವಾಗುವುದೇ ಇಲ್ಲ.

ರಾಜಕೀಯ ಅಧಿಕಾರದ ಜೊತೆಯಲ್ಲಿ ಆರ್ಥಿಕಶಕ್ತಿಯ ವಿಕೇಂದ್ರೀಕರಣವೂ ಆಗಬೇಕು. ವಿಕೇಂದ್ರೀಕೃತ ಅರ್ಥವ್ಯವಸ್ಥೆ ಎಂದರೆ ಮನುಷ್ಯನ ಶ್ರಮಶಕ್ತಿ ಆಧಾರವಾಗಿರುವ ಸಣ್ಣ ಉದ್ಯಮಗಳ ವ್ಯವಸ್ಥೆ. ಜನತೆಗೆ ಉಪಯುಕ್ತವಾದ ಎಲ್ಲ ಅಗತ್ಯ ಬಳಕೆಯ ವಸ್ತುಗಳ ಉತ್ಪಾದನೆ ಕುಟೀರಗಳಲ್ಲಿ ಅಥವಾ ಸಣ್ಣ ಸಣ್ಣ ಘಟಕಗಳಲ್ಲಿ ಆಗುತ್ತದೆ. ಭಾರತದಂಥ ಜನಬಾಹುಳ್ಯವಿರುವ ದೇಶದಲ್ಲಿ ಕೋಟಿ ಕೋಟಿ ಕೈಗಳೂ ಲಕ್ಷೋಪಲಕ್ಷ ಕುಟೀರಗಳಲ್ಲಿ ಉತ್ಪಾದಿಸಿದ ವಸ್ತುಗಳ ಒಟ್ಟು ಗಾತ್ರ ಆಗಾಧವಾದ ಜನರ ಆವಶ್ಯಕತೆಗಳನ್ನು ಪೊರೈಸುತ್ತದೆ. ಶ್ರಮಶಕ್ತಿಗೆ ಪುರಕವಾಗಿ ಸಣ್ಣ ಯಂತ್ರಗಳಿಗೆ ಅವಕಾಶವಿರುತ್ತದೆ. ಇಂಥ ವ್ಯವಸ್ಥೆಯಲ್ಲಿ ಮಧ್ಯವರ್ತಿಗಳಿಂದ ಶೋಷಣೆ ಅಥವಾ ಲಾಭಬಡುಕತನ ಇರುವುದಿಲ್ಲ. ಉತ್ಪಾದನೆ ವಿತರಣೆಗಳು ಒಟ್ಟಿಗೆ ಆಗಿ ಪರಮಾವಧಿ ಉದ್ಯೋಗ ಪ್ರಾಪ್ತಿ ಹಾಗೂ ನ್ಯಾಯೋಚಿತ ವಿತರಣೆ ಆಗುತ್ತದೆ.

ಅನಿವಾರ್ಯವಾಗಿ ಹಲವು ಬೃಹತ್ ಕೈಗಾರಿಕೆಗಳು ಇರಬೇಕಾದ ಸಂದರ್ಭದಲ್ಲಿ ಅದರ ಮಾಲೀಕತ್ವದಲ್ಲಿ ಕಾರ್ಮಿಕರ ಸಹಭಾಗಿತ್ವ ಇರಬೇಕು. ಮಾಲೀಕರು ಉದ್ಯಮದ ಧರ್ಮದರ್ಶಿಗಳಾಗಿ ವರ್ತಿಸಿ ಕಾರ್ಮಿಕವರ್ಗಕ್ಕೆ ಸಮಪಾಲು ನೀಡಬೇಕು. ಮಾಲೀಕ ವರ್ಗ ಹಾಗೇ ನಡೆದುಕೊಳ್ಳದಿದ್ದ ಪಕ್ಷದಲ್ಲಿ ಅಂಥ ಭಾರೀ ಉದ್ಯಮಗಳು ಸರ್ಕಾರದ ಒಡೆತನಕ್ಕೆ ಒಳಪಡುತ್ತವೆ. ಸರ್ಕಾರದ ಅಧೀನದಲ್ಲಿದ್ದರೂ ಅದರ ಆಡಳಿತ ನೌಕರಶಾಹಿಯ ಮುಷ್ಟಿಯಲ್ಲಿರದೆ ಕಾರ್ಮಿಕರ ಪ್ರಾತಿನಿಧ್ಯವುಳ್ಳ ದಕ್ಷ ಆಡಳಿತ ಮಂಡಲಿಯಲ್ಲಿರತಕ್ಕದ್ದು.

ಗಾಂಧಿಯವರ ಕಲ್ಪನೆಯ ಸಮಾಜ ಜಾತಿರಹಿತ ಹಗೂ ವರ್ಗರಹಿತ ಸಮಾಜ. ಎಲ್ಲ ಜನರ ಸರ್ವಾಂಗೀಣ ವಿಕಾಸಕ್ಕೆ ಇದರಲ್ಲಿ ಆದ್ಯ ಗಮನ. ಸ್ತ್ರೀಪುರುಷರು ರಾಷ್ಟ್ರನಿರ್ಮಾಣ ಕಾರ್ಯದಲ್ಲಿ ಸಹಭಾಗಿಗಳು.

ಸ್ವರಾಜ್ಯದ ರಾಜಕಾರಣ ಸೇವಾಪರವಾದ ರಾಜಕಾರಣ. ನೀತಿಬಾಹಿರವಾದ ರಾಜಕಾರಣ ಪಾಶವೀ ರಾಜಕೀಯವಾದ್ದರಿಂದ ಅದು ಸಮಾಜಘಾತಕ. ಸಾಧನ, ಗುರಿ ಇವೆರಡೂ ಪವಿತ್ರವಾಗಿದ್ದಲ್ಲಿ ರಾಜಕಾರಣ ಪರಿಶುದ್ಧವಾಗಿರುತ್ತದೆ. ಜನತೆಯಿಂದ ಚುನಾಯಿತರಾದ ಪ್ರತಿನಿಧಿಗಳು ಪ್ರಾಮಾಣಿಕವಾಗಿ ಸೇವಾತತ್ಪರರಾಗಿದ್ದರೆ ಅವರು ನಡೆಸುವ ಸರ್ಕಾರ ಸೇವಾಸಾಧನವಾಗುತ್ತದೆ. ವಿವಿಧ ಘಟ್ಟಗಳಲ್ಲಿ ಜನರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ವ್ಯಷ್ಟಿ ಹಾಗೂ ಸಮಷ್ಟಿ ಹಿತಕ್ಕಾಗಿ ಸಕ್ರಿಯವಾಗಿ ಕೆಲಸ ಮಾಡುವುದರಿಂದ ಸಮಾಜದ ಅಭ್ಯುದಯ ಉಂಟಾಗುತ್ತದೆ. ಅಂಥ ಸಮಾಜ ಸರ್ವರ ಯೋಗಕ್ಷೇಮ ಸಾಧಿಸುವ ಸರ್ವೋದಯ ಸಮಾಜವಾಗುತ್ತದೆ. ಅದು ಸ್ವರಾಜ್ಯವು ಸುರಾಜ್ಯವೂ ಆಗಿರುತ್ತದೆ. ಗಾಂಧಿಯವರ ಸ್ವರಾಜ್ಯದ ಕಲ್ಪನೆ ಕೇವಲ ಭಾರತಕ್ಕೆ ಸೀಮಿತವಾಗಿರದೆ ಇಡೀ ಮಾನವಜನಾಂಗಕ್ಕೆ ಅನ್ವಯಿಸುತ್ತದೆ. ದೊಡ್ಡವು, ಚಿಕ್ಕವು ಎಂಬ ಭೇದವಿಲ್ಲದೆ ಎಲ್ಲ ರಾಜ್ಯಗಳೂ ಸರಿಸಮಾನವಾದವು. ಎಲ್ಲ ದೇಶಗಳಲ್ಲೂ ರಾಜ್ಯವ್ಯವಸ್ಥೆ ಸತ್ಯ, ಅಹಿಂಸೆ, ವಿಕೇಂದ್ರೀಕರಣ ಇವುಗಳ ಆಧಾರದ ಮೇಲೆ ರಚಿತವಾದರೆ ವಿಶ್ವಶಾಂತಿ ಶಾಶ್ವತ ವಾಗಿರುತ್ತದೆ. ಮಾನವ ಸ್ವಾತಂತ್ರ್ಯದ ದಿಗಂತ ವಿಸ್ತಾರವಾಗುತ್ತದೆ.